
Ramanath Rai | ಜಿಲ್ಲೆಗೆ ಏಕೆ ಪ್ರತ್ಯೇಕ ಮಾರ್ಗಸೂಚಿ?, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಸರ್ಕಾರಕ್ಕೆ ರಮಾನಾಥ ರೈ ಮನವಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಮಾರ್ಗಸೂಚಿಯನ್ನು ಅನುಸರಿಸುತ್ತಿರುವ ಬಗ್ಗೆ ಮಾಜಿ ಸಚಿವ ಬಿ. ರಮಾನಾಥ ರೈ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಜಾರಿ ಮಾಡಿದೆ. ಇದನ್ನು ಜಾರಿ ಮಾಡಬೇಕೆ ಹೊರತು ಪ್ರತ್ಯೇಕ ನಿಯಮಗಳನ್ನು ಜಾರಿಗೆ ತಂದು ಜನರನ್ನು ಅನಗತ್ಯ ಗೊಂದಲಕ್ಕೆ ದೂಡಲಾಗುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಕೋವಿಡ್ 19 ಎರಡನೇ ಅಲೆಯೂ ಜನರ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಜನರು ಈಗಾಗಲೇ ಮಾನಸಿಕ ತುಮುಲದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ನಿಯಮಗಳನ್ನು ಜಾರಿ ಮಾಡಿರುವುದರಿಂದ ಈ ಸಂಕಷ್ಟ ಇನ್ನಷ್ಟು ಜಾಸ್ತಿಯಾಗಿದೆ ಎಂದು ಅವರು ಹೇಳಿದರು.
ಖರೀದಿಗೆ ಕಡಿಮೆ ಸಮಯ ನೀಡಿದರೆ ಮಾರುಕಟ್ಟೆ, ಅಂಗಡಿಗಳಲ್ಲಿ ಜನಜಂಗುಳಿ ಸಹಜ. ಆದರೆ, ಈ ರೀತಿ ಜನ ಸೇರುವುದು ಒಳ್ಳೆಯದಲ್ಲ. ಅದನ್ನು ತಪ್ಪಿಸಲು ಸೂಕ್ತ ಕಾಲಾವಕಾಶ ನೀಡಬೇಕು ಎಂದು ರಮಾನಾಥ ರೈ ತಿಳಿಸಿದ್ದಾರೆ.
ರಾಜ್ಯದಲ್ಲಿ ಲಾಕ್ಡೌನ್ ಹೇರುವ ಮುಂಚಿತವಾಗಿ ಮೂರು ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಾರ್ಗಸೂಚಿಯನ್ನು ಯಥಾವತ್ ಜಾರಿ ಮಾಡಿದ್ದು, ಮೀನು ಮಾರಾಟಗಾರರಿಗೆ ಕೋವಿಡ್ ನಿಯಂತ್ರಣ ಸೂತ್ರಗಳನ್ನು ಅನುಸರಿಸಿ ಮೀನು ಮಾರಾಟ ಮಾಡಲು ಅವಕಾಶ ನೀಡಿ ಎಂದು ಅಧಿಕಾರಿಗಳಿಗೆ ಮಾಜಿ ಸಚಿವ ರಮಾನಾಥ ರೈ ಸೂಚಿಸಿದರು.
ಕೋವಿಡ್ 19 ವಿರುದ್ಧ ಹೋರಾಟ ನಡೆಸುವಾಗ ಜಿಲ್ಲೆಯ ಮುಖಂಡರು, ತಜ್ಞರು, ಸಾಮಾಜಿಕ ಕಾರ್ಯಕರ್ತರು ಮತ್ತು ಸೇವಾ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟಿತ ಪ್ರಯತ್ನ ನಡೆಸಬೇಕಿತ್ತು. ಆಗ ಈ ಹೋರಾಟಕ್ಕೆ ಮತ್ತಷ್ಟು ಬಲ ಬರುತ್ತದೆ ಎಂದು ಅವರು ಕಿವಿಮಾತು ಹೇಳಿದರು.