-->
ವಾಟ್ಸ್ಆ್ಯಪ್ ಗ್ರೂಪ್ ಅಡ್ಮಿನ್ ಗೂ ತಟ್ಟಿತು ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಬಿಸಿ

ವಾಟ್ಸ್ಆ್ಯಪ್ ಗ್ರೂಪ್ ಅಡ್ಮಿನ್ ಗೂ ತಟ್ಟಿತು ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಬಿಸಿ


ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ನೀತಿ ಸಂಹಿತೆಯನ್ನು ಘೋಷಿಸಿದೆ. ಇದೀಗ ವಾಟ್ಸ್ಆ್ಯಪ್ ಗ್ರೂಪ್‌ ಅಡ್ಮಿನ್‌ಗೂ ನೀತಿ ಸಂಹಿತೆ ಉಲ್ಲಂಘನೆಯ ಬಿಸಿ ತಟ್ಟಿದೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ವಿ.ಪಿ.ಶಶಿಧರ್ ಎಂಬವರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಾರಣ ಕೇಳಿ ಮಾ.30ರಂದು ಜಾರಿ ಮಾಡಿರುವ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿರುವ ಸಂದರ್ಭದಲ್ಲಿ ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಇನ್ನಿತರ ಮೂಲಗಳಿಂದ ಯಾವುದೇ ರಾಜಕೀಯ ಪ್ರಚಾರ ಮಾಡಬೇಕಾದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೇಮಕ ಮಾಡಲಾಗಿರುವ ಡಿಸ್ಟ್ರಿಕ್ಟ್ ಮೀಡಿಯಾ ಸರ್ಟಿಫಿಕೇಷನ್ ಆ್ಯಂಡ್ ಮಾನಿಟರಿಂಗ್ ಕಮಿಟಿ ಇವರಿಂದ ಪೂರ್ವ ಅನುಮತಿ ಪಡೆಯಬೇಕಾಗಿರುತ್ತದೆ ಚುನಾವಣಾಧಿಕಾರಿ ಹೇಳಿದ್ದಾರೆ.

ಆದ್ದರಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ವಿ.ಪಿ.ಶಶಿಧರ್ ಎಂಬವರಿಗೆ ನೋಟಿಸ್ ಜಾರಿ ಮಾಡಿ 'ನೀವು ಅಡ್ಮಿನ್ ಆಗಿರುವ ನಮ್ಮ ಕುಶಾಲನಗರ ವಾಟ್ಸ್ ಆ್ಯಪ್ ಗ್ರೂಪ್‌ನ ಮೂಲಕ ಯಾವುದೇ ಪೂರ್ವಾನುಮತಿಯಿಲ್ಲದೆ ರಾಜಕೀಯ ಪ್ರೇರಿತ ಹೇಳಿಕೆಯ ವೀಡಿಯೊ ತುಣುಕನ್ನು ಹಂಚಿಕೊಂಡಿರುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಆದುದರಿಂದ, ಪ್ರಜಾಪ್ರತಿನಿಧಿ ಕಾಯ್ದೆ 1951ರ ರೀತ್ಯ ನಿಮ್ಮ ಮೇಲೆ ಏಕೆ ಕಾನೂನು ಕ್ರಮ ಜರುಗಿಸಬಾರದು ಎಂಬುದಕ್ಕೆ ಈ ನೋಟಿಸ್ ತಲುಪಿದ 24 ಗಂಟೆಯೊಳಗಾಗಿ ಖುದ್ದು ಲಿಖಿತ ಸಮಜಾಯಿಷಿಯನ್ನು ನೀಡುವಂತೆ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ನಿಮ್ಮ ಸಮಜಾಯಿಷಿ ಏನು ಇಲ್ಲವೆಂದು ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಚುನಾವಣಾಧಿಕಾರಿ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಡಿ ಡಾ.ಮಂತರ್ ಗೌಡ ಹಾಗೂ ವಿ.ಪಿ.ಶಶಿಧರ್ ಅವರಿಗೆ ಉತ್ತರ ನೀಡುವಂತೆ ನೋಟೀಸ್ ನೀಡಲಾಗಿತ್ತು. ಇಬ್ಬರೂ ಶುಕ್ರವಾರ ಉತ್ತರ ನೀಡಿದ್ದು, ಅದನ್ನು ಪರಿಶೀಲಿಸಿದ ನಂತರ ಕ್ರಮ ಕೈಗೊಳ್ಳಬೇಕೇ, ಬೇಡವೇ ಎನ್ನುವುದನ್ನು ನಿರ್ಧರಿಸಲಾಗುವುದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article