-->
ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಗ್ಯಾಸ್  ಬೆಲೆ ರೂ.200 ಇಳಿಕೆ - ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಗ್ಯಾಸ್ ಬೆಲೆ ರೂ.200 ಇಳಿಕೆ - ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಲೇಖನ ಈ ಕೆಳಗಿನಂತಿದೆ

ಕೊನೆಗೂ ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200 ಕಡಿಮೆ ಮಾಡಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳು. ನಮ್ಮ ಜನಪರವಾದ ಯೋಜನೆಗಳಿಂದ ಪ್ರೇರಿತರಾಗಿ ಜಾರಿಗೆ ತರುವ ಎಲ್ಲ ಯೋಜನೆಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.

ಚುನಾವಣಾ ಪೂರ್ವದಲ್ಲಿ ನಾವು ಪ್ರಣಾಳಿಕೆ ಮೂಲಕ ನೀಡಿದ ಭರವಸೆಗಳಲ್ಲಿ ಪ್ರಮುಖವಾದ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕನ್ನು ನೂರು ದಿನಗಳೊಳಗೆ ನಮ್ಮ ಸರ್ಕಾರ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ನುಡಿದಂತೆ ನಡೆಯುವ ನಮ್ಮ ಬದ್ಧತೆ ನಿಮಗೂ ಪ್ರೇರಣೆಯಾಗಲಿ, ಅದರಿಂದ ಜನರಿಗೆ ಒಳ್ಳೆಯದಾಗಲಿ ಎಂದು ಮನ:ಪೂರ್ವಕವಾಗಿ ಹಾರೈಸುತ್ತೇನೆ. 

2013ರ ವಿಧಾನಸಭಾ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನತಗೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಹಿಂದಿನ ನಮ್ಮ ಸರ್ಕಾರ ಈಡೇರಿಸಿದ್ದು, ಅದರ ಬಗೆಗಿನ ವಿವರವಾದ ಅಧಿಕೃತ ಮಾಹಿತಿಯನ್ನು ರಾಜ್ಯದ ಜನರ ಮುಂದಿಟ್ಟಿದ್ದೇವೆ. ಈ ನಮ್ಮ ಬದ್ಧತೆ ಕೂಡಾ ನಿಮಗೆ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ.

2014 ಮತ್ತು 2018ರ ಲೋಕಸಭಾ ಚುನಾವಣಾ ಪೂರ್ವದಲ್ಲಿ ಭಾರತೀಯ ಜನತಾ ಪಕ್ಷ ಬಿಡುಗಡೆಗೊಳಿಸಿರುವ ಎರಡು ಪ್ರಣಾಳಿಕೆಗಳು ನನ್ನ ಮುಂದಿದೆ. ಮೂರನೇ ಬಾರಿ ಪ್ರಧಾನ ಮಂತ್ರಿಯಾಗಲು ಹೊರಟಿರುವ ನರೇಂದ್ರ ಮೋದಿ ಅವರೇ, ದಯವಿಟ್ಟು ಈ ಎರಡು ಪ್ರಣಾಳಿಕೆಗಳಲ್ಲಿನ ಎಷ್ಟು ಭರವಸೆಗಳನ್ನು ಈಡೇರಿಸಲಾಗಿದೆ ಎನ್ನುವ ಲೆಕ್ಕವನ್ನು ನಮಗಲ್ಲವಾದರೂ ದೇಶದ ಜನತೆಗೆ ಕೊಡಿ ಎನ್ನುವುದು ನನ್ನ ವಿನಮ್ರ ವಿನಂತಿ. 

ನಿಮ್ಮ ನೇತೃತ್ವದ ಕೆಂದ್ರ ಸರ್ಕಾರವು ಬಹಳಷ್ಟು ಮೀನಮೇಷ ಎಣಿಸಿದ ನಂತರ ಅಂತಿಮವಾಗಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ರೂ.200 ಕಡಿಮೆ ಮಾಡಿ ಘೋಷಣೆ ಮಾಡಿದೆ. ಆದರೆ, ಮೇಲುನೋಟಕ್ಕೆ ಇದರಲ್ಲಿ ಕೇಂದ್ರದ ಪಾಲು ಏನೂ ಇಲ್ಲ ಎನ್ನುವುದು ನಿಚ್ಚಳಗೊಂಡಿದೆ. ‘ಕಾರ್ಪೊರೆಟ್‌ ಹೊಣೆಗಾರಿಕೆ’ಯ ರೀತಿ ತೈಲ ಕಂಪೆನಿಗಳೇ ಈ ವೆಚ್ಚವನ್ನು ಭರಿಸಲಿವೆ ಎಂದು ನಿಮ್ಮದೇ ಮಂತ್ರಿಮಂಡಲದ ಸಚಿವರು ಹೇಳುವ ಮೂಲಕ ಅದನ್ನು ಒಪ್ಪಿಕೊಂಡಿದ್ದಾರೆ. 

ಅಡುಗೆ ಅನಿಲ ದರ ನಿಗದಿಗೆ ಆಧಾರವಾದ ಅಂತಾರಾಷ್ಟ್ರೀಯ ಮಾರುಕಟ್ಟೆಯ ‘ಸೌದಿ ಸಿಪಿ’ ದರ ಪ್ರತಿ ಟನ್‌ಗೆ ಈ ಆರ್ಥಿಕ ವರ್ಷಾರಂಭದಲ್ಲಿ 732 ಡಾಲರ್‌ ಇದ್ದದ್ದು, ಈಗ 385 ಡಾಲರ್‌ಗೆ ಕುಸಿದಿದೆ. ಅಂದರೆ ಶೇ.48ರಷ್ಟು ಇಳಿಕೆಯಾಗಿದೆ. ಸಿಲಿಂಡರ್ ದರವೂ ಹೆಚ್ಚು ಕಡಿಮೆ ಅರ್ಧದಷ್ಟು ಇಳಿಕೆ ಮಾಡಬೇಕಿತ್ತಲ್ಲವೇ? ಆದರೆ, ಕೇಂದ್ರ ಸರ್ಕಾರ ಇಳಿಕೆ ಮಾಡಿರುವುದು ಪ್ರತಿ ಸಿಲಿಂಡರ್‌ಗೆ ರೂ. 200 ಮಾತ್ರ, ಯಾಕೆ? 

ಜನರ ಮೇಲಿನ ಬೆಲೆ ಏರಿಕೆಯ ಹೊರೆ ಇಳಿಸುವ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರ ಹೊಂದಿದ್ದರೆ ಪ್ರತಿ ಸಿಲಿಂಡರ್‌ನ  ಬೆಲೆಯನ್ನು ಕನಿಷ್ಠ ರೂ.500-600ರಷ್ಟು ಇಳಿಸಬೇಕಾಗಿದೆ. ಇದೇ ರೀತಿ ಡೀಸೆಲ್-ಪೆಟ್ರೋಲ್ ಬೆಲೆಯನ್ನು ರೂ.60-70ಕ್ಕೆ ಇಳಿಸಬೇಕಾಗುತ್ತದೆ. ಇದನ್ನು ಮಾಡದೆ ಇದ್ದರೆ ಇದೊಂದು ಕಣ್ಣೊರೆಸುವ ತಂತ್ರ, ಚುನಾವಣಾ ಗಿಮಿಕ್, ಬಾಯಿ ಬಡಾಯಿ ಎಂದು ಹೇಳಬೇಕಾಗುತ್ತದೆ. 

ಜಾಗತಿಕವಾಗಿ ಅನಿಲ ಬೆಲೆಯಲ್ಲಿ ಅಪಾರ ಇಳಿಕೆಯಾದಾಗಲೂ ಜನರ ಹಿತಾಸಕ್ತಿಯನ್ನು ರಕ್ಷಿಸದ ಕೇಂದ್ರ ಸರ್ಕಾರ ಬದಲಿಗೆ ತೈಲೋತ್ಪನ್ನ ಕಂಪೆನಿಗಳಿಗೆ ಅಪಾರ ಪ್ರಮಾಣದ ಲಾಭ ಮಾಡಿಕೊಳ್ಳಲು ಅವಕಾಶ ಕಲ್ಪಿಸಿತ್ತು. ಈಗಲೂ ಸಹ ಅನಿಲ ಬೆಲೆಯನ್ನು ಕೇವಲ ರೂ. 200 ಮಾತ್ರವೇ ಇಳಿಕೆ ಮಾಡಿ ತೈಲೋತ್ಪನ್ನ ಕಂಪೆನಿಗಳಿಗೆ ಲಾಭ ಮಾಡಿಕೊಳ್ಳಲು ಅವಕಾಶ ನೀಡಿದೆ. ಇದರಲ್ಲಿ, ಜನರ ಹಿತಾಸಕ್ತಿ ಎಲ್ಲಿ ಅಡಗಿದೆ ಪ್ರಧಾನಿಯವರೇ? 

ಜನತೆಯನ್ನು ಬೆಲೆ ಏರಿಕೆಯಿಂದ ರಕ್ಷಿಸುವ, ಸ್ವಾವಲಂಬಿಗಳಾಗಿಸಿರುವ ನಮ್ಮ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಅವುಗಳಿಂದ ಭಯಭೀತರಾಗಿ ತೋರಿಕೆಗೆ ಮಾತ್ರ ಇಂತಹ ಕ್ರಮಕ್ಕೆ ಮುಂದಾಗಿರುವುದು ಸ್ಪಷ್ಟ. ಆದರೆ, ದೇಶದ ಜನತೆ “ಕೆಲಸ ಮಾಡದೆ ಪುಕ್ಕಟೆ ಪ್ರಚಾರ ಪಡೆದುಕೊಳ್ಳುವ, ಬಣ್ಣದ ಮಾತುಗಳಿಂದಲೇ ಜನರ ಹೊಟ್ಟೆ ತುಂಬಿಸುವ” ಬಿಜೆಪಿಯ ಪೊಳ್ಳು ಆಡಳಿತವನ್ನು ಅರಿತಿದ್ದಾರೆ. ಇಂತಹ ಕಣ್ಕಟ್ಟಿನ ತಂತ್ರಗಳನ್ನು ಇನ್ನು  ಮುಂದುವರಿಸಲಾಗದು. 
- ಮುಖ್ಯಮಂತ್ರಿ Siddaramaiah 


Ads on article

Advertise in articles 1

advertising articles 2

Advertise under the article